Effect of Iran War | No need to worry about LPG shortage, advice to use it sparingly
x

ಸಚಿವ ಕೆ.ಎಚ್‌. ಮುನಿಯಪ್ಪ

ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಿಗೊಮ್ಮೆ ಎಲ್‌ಪಿಜಿ ಸಿಲಿಂಡರ್ ವಿತರಣೆ: ಸಚಿವ ಕೆ.ಎಚ್. ಮುನಿಯಪ್ಪ

ಅತ್ಯಗತ್ಯ ಸೇವೆಯಾಗಿರುವ ಆಸ್ಪತ್ರೆಗಳಿಗೆ ಯಾವುದೇ ಕೊರತೆಯಾಗದಂತೆ ಶೇಕಡಾ 100ರಷ್ಟು ಅಡುಗೆ ಅನಿಲವನ್ನು ಒದಗಿಸಲಾಗುತ್ತಿದೆ ಎಂದು ಮುನಿಯಪ್ಪ ಅವರು ಭರವಸೆ ನೀಡಿದರು.


Click the Play button to hear this message in audio format

ರಾಜ್ಯದಲ್ಲಿ ತಲೆದೋರಿರುವ ಅಡುಗೆ ಅನಿಲ (ಎಲ್‌ಪಿಜಿ) ಅಭಾವದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಹಾಗೂ ಗೃಹ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಲಭ್ಯವಿರುವ ಎಲ್‌ಪಿಜಿಯನ್ನು ಆದ್ಯತೆಯ ಮೇರೆಗೆ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ನಗರ ಪ್ರದೇಶಗಳಲ್ಲಿನ ಗೃಹ ಬಳಕೆದಾರರಿಗೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್ ವಿತರಿಸಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶದ ಜನರಿಗೆ ಪ್ರತಿ 45 ದಿನಗಳಿಗೊಮ್ಮೆ ಒಂದು ಸಿಲಿಂಡರ್ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹೋಟೆಲ್ ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸ್ಥಿತಿ

ಅಡುಗೆ ಅನಿಲದ ಕೊರತೆಯಿಂದಾಗಿ ರಾಜ್ಯದಲ್ಲಿ ಅನೇಕ ಹೋಟೆಲ್‌ಗಳು ಮುಚ್ಚುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, ಸದ್ಯಕ್ಕೆ ಹೋಟೆಲ್ ಉದ್ಯಮಕ್ಕೆ ಶೇಕಡಾ 20ರಷ್ಟು ಮಾತ್ರ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ ಎಂದರು. ಆದರೆ, ಅತ್ಯಗತ್ಯ ಸೇವೆಯಾಗಿರುವ ಆಸ್ಪತ್ರೆಗಳಿಗೆ ಯಾವುದೇ ಕೊರತೆಯಾಗದಂತೆ ಶೇಕಡಾ 100ರಷ್ಟು ಅಡುಗೆ ಅನಿಲವನ್ನು ಒದಗಿಸಲಾಗುತ್ತಿದೆ. ಸಾಧ್ಯವಾದಷ್ಟು ಮಟ್ಟಿಗೆ ಹೋಟೆಲ್‌ಗಳಿಗೂ ಹೆಚ್ಚುವರಿ ವಾಣಿಜ್ಯ ಸಿಲಿಂಡರ್‌ಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಭರವಸೆ ನೀಡಿದರು.

ಕೇಂದ್ರದ ಜೊತೆ ಸಭೆ, ಮಂಗಳವಾರ ಮಹತ್ವದ ನಿರ್ಧಾರ

ಈ ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು. ಮುಂಬರುವ ಮಂಗಳವಾರದಂದು (ಮಾರ್ಚ್ 31, 2026) ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಯಲಿದ್ದು, ಆ ದಿನ ವಾಣಿಜ್ಯ ಬಳಕೆಯ ಹೆಚ್ಚುವರಿ ಸಿಲಿಂಡರ್‌ಗಳ ಪೂರೈಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇದರ ಜೊತೆಗೆ, ಕೆಲವು ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿರುವ ವಿಚಾರವೂ ಸರ್ಕಾರದ ಗಮನಕ್ಕೆ ಬಂದಿದ್ದು, ಆ ಬಗ್ಗೆಯೂ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Read More
Next Story