
ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ಭೀತಿ ಮತ್ತು ಸೇನಾ ಕಾರ್ಯಾಚರಣೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಇಂಡಿಗೊ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತಮ್ಮ ವಿಮಾನ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿವೆ.
ಇಸ್ರೇಲ್-ಇರಾನ್ ಉದ್ವಿಗ್ನತೆ: ಮಧ್ಯಪ್ರಾಚ್ಯಕ್ಕೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ, ಇಂಡಿಗೊ
ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಇರಾನ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಅಮೆರಿಕ ಹಾಗೂ ಇಸ್ರೇಲ್ ಪಡೆಗಳು ಶನಿವಾರ ಜಂಟಿಯಾಗಿ ಇರಾನ್ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿವೆ.
ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ಭೀತಿ ಮತ್ತು ಸೇನಾ ಕಾರ್ಯಾಚರಣೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಇಂಡಿಗೊ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತಮ್ಮ ವಿಮಾನ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿವೆ. ಪ್ರಯಾಣಿಕರು ಹಾಗೂ ವಿಮಾನಯಾನ ಸಿಬ್ಬಂದಿಯ ಜೀವ ರಕ್ಷಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಇರಾನ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಅಮೆರಿಕ ಹಾಗೂ ಇಸ್ರೇಲ್ ಪಡೆಗಳು ಶನಿವಾರ ಜಂಟಿಯಾಗಿ ಇರಾನ್ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿವೆ. ಇರಾನ್ನ ಪರಮೋಚ್ಛ ನಾಯಕ ಆಯತೊಲ್ಲಾ ಖಮೇನಿ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಠಾತ್ ಸೇನಾ ಕಾರ್ಯಾಚರಣೆಯ ಬೆನ್ನಲ್ಲೇ ರೊಚ್ಚಿಗೆದ್ದಿರುವ ಇರಾನ್ ಕೂಡ ಇಸ್ರೇಲ್ ಮೇಲೆ ಪ್ರತಿದಾಳಿ ಆರಂಭಿಸಿದೆ. ಇದರಿಂದಾಗಿ ಇಡೀ ಮಧ್ಯಪ್ರಾಚ್ಯ ಭಾಗದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ವಾಯುಪ್ರದೇಶದಲ್ಲಿ ತೀವ್ರ ಅಭದ್ರತೆ ನಿರ್ಮಾಣವಾಗಿದೆ.
ವಿಮಾನಯಾನ ಸಂಸ್ಥೆಗಳ ಅಧಿಕೃತ ಸ್ಪಷ್ಟನೆ
ಈ ಆತಂಕಕಾರಿ ಯುದ್ಧದ ಭೀತಿಯ ಬೆನ್ನಲ್ಲೇ ಎಕ್ಸ್ ಜಾಲತಾಣದಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಏರ್ ಇಂಡಿಯಾ ಸಂಸ್ಥೆಯು, ಮಧ್ಯಪ್ರಾಚ್ಯದಲ್ಲಿ ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಪ್ರಸ್ತುತ ಭದ್ರತಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆ ಭಾಗದ ಎಲ್ಲ ತಾಣಗಳಿಗೂ ವಿಮಾನ ಸೇವೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದೇ ವಿಚಾರವಾಗಿ ಇಂಡಿಗೊ ಸಂಸ್ಥೆ ಕೂಡ ತನ್ನ ನಿರ್ಧಾರವನ್ನು ಪ್ರಕಟಿಸಿದ್ದು, ಸಂಸ್ಥೆಗೆ ತಮ್ಮ ಗ್ರಾಹಕರು ಹಾಗೂ ವಿಮಾನಯಾನ ಸಿಬ್ಬಂದಿಯ ಭದ್ರತೆ ಮತ್ತು ಸುರಕ್ಷತೆಯೇ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ. ಪ್ರಸ್ತುತ ಅಲ್ಲಿನ ಪರಿಸ್ಥಿತಿ ತಿಳಿಯಾಗುವವರೆಗೆ ಭದ್ರತಾ ಹಿತದೃಷ್ಟಿಯಿಂದ ಮಧ್ಯಪ್ರಾಚ್ಯದ ಮಾರ್ಗಗಳಲ್ಲಿನ ತಮ್ಮೆಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿರುವುದಾಗಿ ಸಂಸ್ಥೆ ಸ್ಪಷ್ಟಪಡಿಸಿದೆ. ಈ ಅನಿರೀಕ್ಷಿತ ವಿಮಾನ ರದ್ದತಿಯಿಂದಾಗಿ ಮಧ್ಯಪ್ರಾಚ್ಯಕ್ಕೆ ಪ್ರಯಾಣ ಬೆಳೆಸಬೇಕಿದ್ದ ಸಾವಿರಾರು ಭಾರತೀಯ ಪ್ರಯಾಣಿಕರು ಪರದಾಡುವಂತಾಗಿದೆ.

