ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ಆರೋಪ : ಪ್ರಕರಣ ಮುಚ್ಚಿ ಹಾಕುವ ಹುನ್ನಾರ?
x

ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ಆರೋಪ : ಪ್ರಕರಣ ಮುಚ್ಚಿ ಹಾಕುವ ಹುನ್ನಾರ?

ಸರ್ಕಾರಿ ನೌಕರರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಪ್ರಕರಣವನ್ನು ಲೋಕಾಯುಕ್ತ ಪೊಲೀಸರ ಬದಲು ಪ್ರತ್ಯೇಕ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಒತ್ತಾಯಗಳು ಕೇಳಿಬಂದಿವೆ.


ಭ್ರಷ್ಟಾಚಾರ ವಿರುದ್ಧ ಸಮರ ಸಾರುವ ಲೋಕಾಯುಕ್ತ ಸಂಸ್ಥೆಯೇ ಭ್ರಷ್ಟಾಚಾರದ ಕೂಪವಾಯಿತಾ..? ಇಂತಹದೊಂದು ಪ್ರಶ್ನೆ ಮತ್ತೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಸರ್ಕಾರಿ ನೌಕರರನ್ನು ಲೋಕಾಯುಕ್ತ ಪೊಲೀಸರ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಪ್ರಕರಣವನ್ನು ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸುತ್ತಿರುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಮೂಡಿದೆ.

ಪ್ರಕರಣವೊಂದರಲ್ಲಿ ಲೋಕಾಯುಕ್ತ ಪೊಲೀಸ್‌ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ಅವರೇ ಭಾಗಿಯಾಗಿರುವುದರಿಂದ ಅದೇ ಸಂಸ್ಥೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಇದು ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆಯೇ ಹೆಚ್ಚಿದೆ ಎಂಬ ಅನುಮಾನಗಳು ಮೂಡಿದೆ. ಪ್ರಕರಣದಲ್ಲಿ ಸರ್ಕಾರದ ಕೆಲವು ಹಿರಿಯ ಅಧಿಕಾರಿಗಳೇ ಭಾಗಿಯಾಗಿರುವ ಆರೋಪಗಳು ಸಹ ಕೇಳಿ ಬಂದಿರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರವೂ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಪ್ರಕರಣದ ಪ್ರಮುಖ ಆರೋಪ ಮಾಜಿ ಹೆಡ್‌ಕಾನ್‌ಸ್ಟೇಬಲ್ ನಿಂಗಪ್ಪ ಅಲಿಯಾಸ್‌ ಸಾವಂತ್‌ನ ತಲೆಗೆ ಆರೋಪ ಕಟ್ಟಿ ಮುಗಿಸುವ ಸಾಧ್ಯತೆ ಇದೆ. ಸರ್ಕಾರದ ಕೆಲವು ಹಿರಿಯ ಅಧಿಕಾರಿಗಳ ಸುತ್ತ ಪ್ರಕರಣ ತಿರುಗುತ್ತಿರುವುದರಿಂದ ಆರೋಪಿ ನಿಂಗಪ್ಪನ ಹಂತದಲ್ಲಿಯೇ ಪ್ರಕರಣಕ್ಕೆ ಇತಿಶ್ರೀ ಹಾಡುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಸರ್ಕಾರವು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಒಂದು ವೇಳೆ ತನಿಖೆಯನ್ನು ಸಿಐಡಿ ಅಥವಾ ಇತರೆ ತನಿಖಾ ಸಂಸ್ಥೆಗಳಿಗೆ ವಹಿಸಿದರೆ ಮಾತ್ರ ಪ್ರಕರಣ ಜೀವಂತವಾಗಿರಲಿದ್ದು, ಪ್ರಮುಖ ಅಧಿಕಾರಿಗಳಿಗೂ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಲೋಕಾಯುಕ್ತ ಸಂಸ್ಥೆಯ ಮೂಲಗಳು ಹೇಳಿವೆ.

ಪ್ರಕರಣದಲ್ಲಿ ಆರೋಪಿ ಜೊತೆ ನಂಟು ಹೊಂದಿರುವ ಆರೋಪಕ್ಕೊಳಗಾಗಿರುವ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ಅವರಿಗೆ ಬಂಧನ ಭೀತಿಕ್ಕೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದ್ದು, ಅವರ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ಸೇವೆಯಿಂದ ಇದೇ ತಿಂಗಳು 11ರಂದು ಬಿಡುಗಡೆಗೊಳಿಸಲಾಗಿದೆ.

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ

ಲೋಕಾಯುಕ್ತ ಪೊಲೀಸರ ಹೆಸರಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದ ಆರೋಪಿ ನಿಂಗಪ್ಪ ಸುಲಿಗೆ ಮಾಡಿರುವ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಈ ಬಗ್ಗೆ ವಿಚಾರಣೆಯಲ್ಲಿಯೂ ಆರೋಪಿ ಒಪ್ಪಿಕೊಂಡಿದ್ದಾನೆ. ಸುಲಿಗೆ ಹಣವನ್ನು ತನ್ನ ಹಾಗೂ ತನ್ನ ಸಂಬಂಧಿಕರ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದಾನೆ. ಒಟ್ಟು 13 ಕ್ರಿಪ್ಟೋ ವಾಲೆಟ್‌ಗಳಲ್ಲಿ ಹೂಡಿಕೆ ಮಾಡಿದ್ದು, ಈ ಹಣದ ಮೌಲ್ಯ ಪತ್ತೆ ಹಚ್ಚಬೇಕಿದೆ. ಹೀಗಾಗಿ, 13 ವಾಲೆಟ್‌ಗಳನ್ನು ಫ್ರೀಜ್‌ ಮಾಡಿಸಲಾಗಿದೆ. ತನಿಖೆ ಬಳಿಕ ಅದರ ಮೌಲ್ಯದ ಬಗ್ಗೆ ಖಚಿತವಾಗಿ ಮಾಹಿತಿ ಲಭ್ಯವಾಗಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆ ವಿರುದ್ಧ ಭ್ರಷ್ಟಾಚಾರ ಆರೋಪ ಇದೇ ಮೊದಲಲ್ಲ:

ಭ್ರಷ್ಟಾಚಾರ ನಿರ್ಮೂಲನೆ ಮಾಡಲು ರಚಿಸಲಾಗಿರುವ ಲೋಕಾಯುಕ್ತ ಸಂಸ್ಥೆಯು ಸ್ವಾಯತ್ತ ಸಂಸ್ಥೆಯಾಗಿದ್ದು, ಜನತೆಯಲ್ಲಿ ವಿಶ್ವಾಸಾರ್ಹವನ್ನು ಮೂಡಿಸಿದೆ. ಆದರೆ, ಸಂಸ್ಥೆಗೆ ಕಪ್ಪುಚುಕ್ಕೆಯಾಗಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿರುವ ನಿದರ್ಶನ ಇದೆ. ಈ ಹಿಂದೆ ಸಂಸ್ಥೆಯಲ್ಲಿ ಲೋಕಾಯುಕ್ತರಾಗಿದ್ದ ನ್ಯಾ. ವೈ. ಭಾಸ್ಕರ್‌ರಾವ್‌ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿತ್ತು. ವಿಪರ್ಯಾಸವೆಂದರೆ ಪ್ರಕರಣದಲ್ಲಿ ಖುದ್ದು ನ್ಯಾ.ಭಾಸ್ಕರ್‌ ರಾವ್‌ ಪುತ್ರನೇ ಭಾಗಿಯಾಗಿದ್ದ. ಇದಕ್ಕೆ ಭಾಸ್ಕರ್‌ ರಾವ್‌ ಪರೋಕ್ಷವಾಗಿ ಬೆಂಬಲ ನೀಡಿದ್ದರು ಎಂಬ ಆರೋಪಗಳಿದ್ದವು.

ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನ್ ರಾವ್‌ನನ್ನು ಬಂಧಿಸಿದ್ದರು. ಅಲ್ಲದೇ, ಸಂಸ್ಥೆಯಲ್ಲಿ ಪಿಆರ್‌ಓ ಆಗಿದ್ದ ಸಯ್ಯದ್‌ ರಿಯಾಜ್‌ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದರು. ಪತ್ರಕರ್ತ ಶ್ರೀನಿವಾಸ ಸೇರಿದಂತೆ ಇತರರು ಸೇರಿ ಹಣಕ್ಕಾಗಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಕೆ ಹಾಕಲಾಗುತ್ತಿತ್ತು. ಪ್ರಕರಣವು ರಾಜ್ಯದಲ್ಲಿ ಮಾತ್ರವಲ್ಲದೇ, ಇಡೀ ದೇಶದಲ್ಲಿಯೇ ದೊಡ್ಡ ಸದ್ದು ಮಾಡಿತ್ತು.

ಲೋಕಾಯುಕ್ತ ಸಂಸ್ಥೆಗೆ ಅಂಟಿಸಿದ ಕಳಂಕವನ್ನು ತೆಗೆಯಲು ಹಲವು ವರ್ಷಗಳೇ ಬೇಕಾಯಿತು. ಲೋಕಾಯುಕ್ತ ಸಂಸ್ಥೆಗೆ ಅಂಟಿದ ಕಳಂಕವನ್ನು ಹೋಗಿ ಜನತೆಯಲ್ಲಿ ವಿಶ್ವಾಸಾರ್ಹ ಮೂಡಿತ್ತು. ಆದರೆ, ಇದೀಗ ಮತ್ತೊಮ್ಮೆ ಅಂತಹ ಕಳಂಕ ಎದುರಿಸುವಂತಾಗಿದೆ. ಭ್ರಷ್ಟಾಚಾರ ವಿರುದ್ಧ ಸಮರ ಸಾರಿ ನಿರ್ಮೂಲನ ಮಾಡಬೇಕಾದ ಸಂಸ್ಥೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ಸಂಸ್ಥೆಗೆ ಮತ್ತೆ ಕೆಟ್ಟ ಹೆಸರು ಬರುವಂತಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಯಾವುದೇ ಅಧಿಕಾರಿಗಳಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

ಪ್ರಕರಣದ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು. ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸುವುದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನ್ಯಾಯ ಸಮ್ಮತ ಮತ್ತು ಪಾರದರ್ಶಕತೆ ತನಿಖೆಗೆ ಇತರೆ ತನಿಖಾ ಸಂಸ್ಥೆಯಿಂದ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸರ್ಕಾರಕ್ಕೆ ಪತ್ರ ಬರೆಯಲಾಗುವುದು

ಸರ್ಕಾರಿ ನೌಕರರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ ಫೆಡರಲ್‌ ಕರ್ನಾಟಕ ಜೊತೆಗೆ ಮಾತನಾಡಿದ ನೈಜ ಹೋರಾಟಗಾರರ ವೇದಿಕೆ ಅಧ್ಯಕ್ಷ ಎಚ್‌.ಎಂ.ವೆಂಕಟೇಶ್‌, ಜನಪ್ರತಿನಿಧಿಗಳು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದಕ್ಕೆ ಕಡಿವಾಣ ಹಾಕುವ ಸಂಬಂಧ ಲೋಕಾಯುಕ್ತ ಸಂಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮುಖ್ಯಮಂತ್ರಿಗಳಾದರೂ ಸಹ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಲೋಕಾಯುಕ್ತ ಸಂಸ್ಥೆಗೆ ಅಧಿಕಾರ ಇದೆ. ಇಂತಹ ಸ್ವಾಯತ್ತ ಸಂಸ್ಥೆಯಾಗಿರುವ ಲೋಕಾಯುಕ್ತ ಸಂಸ್ಥೆಯಲ್ಲಿಯೇ ಇದೀಗ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ ಎಂದು ಹೇಳಿದರು.

ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸುವುದು ಸೂಕ್ತವಲ್ಲ. ಇದು ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆಯೂ ಹೆಚ್ಚಿರುತ್ತದೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಹಾಗಿದ್ದಲ್ಲಿ ಮಾತ್ರ ನ್ಯಾಯಸಮ್ಮತ ತನಿಖೆ ನಡೆಯಲಿವೆ ಎಂಬ ವಿಶ್ವಾಸವು ಜನತೆಗೆ ಮೂಡಲಿದೆ. ಇಲ್ಲದಿದ್ದರೆ ಏಕಪಕ್ಷೀಯವಾಗಿ ತನಿಖೆ ನಡೆಸಿದಂತಾಗುತ್ತದೆ. ಸಿಬಿಐ ತನಿಖೆಗೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

Read More
Next Story