MLA B.R. Patils statement is an embarrassment to the party: Minister Priyank Kharge
x

ಸಚಿವ ಪ್ರಿಯಾಂಕ್‌ ಖರ್ಗೆ

ಶಾಸಕ ಬಿ.ಆರ್. ಪಾಟೀಲ್‌ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ: ಸಚಿವ ಪ್ರಿಯಾಂಕ್ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಬಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.


ಶಾಸಕ ಬಿ.ಆರ್. ಪಾಟೀಲ್ ಅವರ ಹೋರಾಟದ ಮನೋಭಾವ ಮತ್ತು ಸಿದ್ಧಾಂತಗಳ ಬಗ್ಗೆ ಗೌರವವಿದೆ. ಆದರೆ, ಯಾವುದೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಹಿರಿಯರೊಂದಿಗೆ ಚರ್ಚಿಸಬೇಕಿತ್ತು. ಹೀಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುವುದರಿಂದ ಸರ್ಕಾರಕ್ಕೆ ಮುಜುಗರವಾಗುತ್ತದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

ಮುಂದುವರಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು ಎಂದು ಸಲಹೆ ನೀಡಿದರು.

ಫೋನ್‌ನಲ್ಲಿ ನಡೆದ ಸಂಭಾಷಣೆಯಲ್ಲಿ, ಬಿ.ಆರ್. ಪಾಟೀಲ್ ಅವರ ಆರೋಪಗಳನ್ನು ಅಧಿಕಾರಿ ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಲೋಪವಾಗಿದ್ದರೆ ಆಧಾರ ನೀಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಬೇಕಿತ್ತು. ಈಗ ಮುಖ್ಯಮಂತ್ರಿ ಅವರು ಬಿ.ಆರ್. ಪಾಟೀಲ್ ಅವರನ್ನು ಕರೆದಿದ್ದು, ಅಲ್ಲಿ ಏನು ಚರ್ಚೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಖರ್ಗೆ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿರತೆ

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಗಾಗಿ 50 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಇದರಿಂದಾಗಿ ಜನರ ಆರ್ಥಿಕ ಸ್ಥಿರತೆ ಉಂಟಾಗಿದೆ. ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಸಮಸ್ಯೆ ಎದುರಿಸುತ್ತಿದ್ದ ಜನರಿಗೆ ಈ ಯೋಜನೆಗಳಿಂದ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಕೇಂದ್ರದಿಂದ ಅನುದಾನ ಕಡಿತ ಮತ್ತು ಹಣಕಾಸಿನ ಸಮಸ್ಯೆಗಳು

ರಾಜ್ಯದ ಪ್ರತಿಯೊಬ್ಬ ಶಾಸಕರೂ ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷೆ ಮಾಡುತ್ತಾರೆ. ಅದರಂತೆ ಶಾಸಕ ರಾಜು ಕಾಗೆ ಅನುದಾನ ಕೇಳಿದ್ದಾರೆ, ಅದರಲ್ಲಿ ತಪ್ಪೇನಿಲ್ಲ. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಅಸಡ್ಡೆ ತೋರಿಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಖರ್ಗೆ ಆರೋಪಿಸಿದರು. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ಪಾಲಿನಲ್ಲಿ 50 ಸಾವಿರ ಕೋಟಿ ರೂಪಾಯಿ ಕಡಿತವಾಗಿರುವುದು ಹಣಕಾಸಿನ ಸಮಸ್ಯೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಜಲಜೀವನ್ ಮಿಷನ್‌ಗೆ ಕೇಂದ್ರದಿಂದ ಅನುದಾನ ಬಿಡುಗಡೆ ವಿಳಂಬ

ಜಲಜೀವನ್ ಮಿಷನ್ ಅಡಿಯಲ್ಲಿ ಅಭಿವೃದ್ಧಿ ಕೈಗೊಳ್ಳಲು ಕೇಂದ್ರ ಸರ್ಕಾರ 2,700 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕಿತ್ತು, ಆದರೆ ಕೇವಲ 500 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಕೆಲಸ ಅರ್ಧಕ್ಕೆ ನಿಲ್ಲಿಸಬಾರದು ಎಂಬ ಕಾರಣಕ್ಕೆ ರಾಜ್ಯದಿಂದ ಅನುದಾನ ಬಿಡುಗಡೆ ಮಾಡಿ ಕೆಲಸ ಮುಂದುವರೆಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಇದರ ಜೊತೆಗೆ, ರಾಜ್ಯ ಸರ್ಕಾರದಿಂದ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗಾಗಿ 5,000 ಕೋಟಿ ರೂಪಾಯಿ ಅನುದಾನ ಬಳಸಿ 'ಪ್ರಗತಿ ಪಥ' ಮತ್ತು 'ಕಲ್ಯಾಣ ಪಥ' ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮತ್ತು ಉದ್ಯೋಗ ನಷ್ಟ

ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದ್ದರಿಂದ ರಾಜ್ಯಕ್ಕೆ ಬರಬೇಕಿದ್ದ 15 ಸಾವಿರ ಕೋಟಿ ರೂಪಾಯಿ ಬಂಡವಾಳ ಕೈತಪ್ಪಿದ್ದು, ಕನಿಷ್ಠ ಮೂರು ಸಾವಿರ ಜನರಿಗೆ ಉದ್ಯೋಗ ತಪ್ಪಿದೆ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾಗ 32 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಪ್ಪಂದವಾಗಿತ್ತು, ಅದರಲ್ಲಿ ಸುಮಾರು 21 ಸಾವಿರ ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಲಾಗಿತ್ತು. ಇದರಿಂದ 20 ಸಾವಿರ ಜನರಿಗೆ ಉದ್ಯೋಗ ದೊರಕಿತ್ತು ಎಂದು ಸ್ಮರಿಸಿದರು.

ಕೇಂದ್ರ ವಿದೇಶಾಂಗ ಸಚಿವರಿಗೆ ಅನುಮತಿ ನಿರಾಕರಣೆಗೆ ವಿವರಣೆ ನೀಡುವಂತೆ ಪತ್ರ ಬರೆಯಲಾಗಿದೆ, ಆದರೆ ಅವರಿಂದ ಇನ್ನೂ ಉತ್ತರ ಬಂದಿಲ್ಲ. "ಅವರು ನಮ್ಮ ಯಾವ ಪತ್ರಕ್ಕೆ ಉತ್ತರ ಕೊಟ್ಟಿದ್ದಾರೆ? ಕೇಂದ್ರದಲ್ಲಿರುವುದು ಎನ್‌ಡಿಎ ಸರ್ಕಾರವಲ್ಲ 'ನೋ ಡಾಟಾ ಅವಲೇಬಲ್ ಸರ್ಕಾರ'" ಎಂದು ಟೀಕಿಸಿದರು. ರಾಜ್ಯಕ್ಕೆ ಬರಬೇಕಾಗಿದ್ದ ಬಂಡವಾಳವನ್ನು ಕೇಂದ್ರ ಸರ್ಕಾರ ಮಹಾರಾಷ್ಟ್ರ, ಗುಜರಾತ್, ಅಸ್ಸಾಂ ರಾಜ್ಯಗಳಲ್ಲಿ ಹೂಡುವಂತೆ ಮಾಡಿದೆ. ಅಸ್ಸಾಂನಲ್ಲಿ ಸೆಮಿ ಕಂಡಕ್ಟರ್ ಸ್ಥಾಪನೆ ಮಾಡುತ್ತಿದ್ದಾರೆ. ಇಲ್ಲಿ ನಾವು ಬಂಡವಾಳ ಆಕರ್ಷಿಸಲು ಕಷ್ಟಪಡಬೇಕು. ಅಲ್ಲಿ ಸಬ್ಸಿಡಿ ಎಂದು ಬಂಡವಾಳ ಬಿಡುಗಡೆ ಮಾಡಲಾಗುತ್ತದೆ. ಅವರು ಕಷ್ಟಪಟ್ಟು ಬಂಡವಾಳ ಆಕರ್ಷಿಸಲಿ ಎಂದು ಖರ್ಗೆ ವ್ಯಂಗ್ಯವಾಡಿದರು.

---

Read More
Next Story