ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ: ಹಲವೆಡೆ ಅಲರ್ಟ್ ಘೋಷಣೆ
x

ಸಾಂದರ್ಭಿಕ ಚಿತ್ರ 

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ: ಹಲವೆಡೆ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಬಾಗಲಕೋಟೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


Click the Play button to hear this message in audio format

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮೈ ಕೊರೆಯುವ ಚಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ ಇದು 13 ಡಿಗ್ರಿ ಸೆಲ್ಸಿಯವರೆಗೆ ಇಳಿದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಬೀಸುವ ಸಾಧ್ಯತೆಯಿದೆ. ಬಾಗಲಕೋಟೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್‌ನಲ್ಲಿ 7.4°C ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ಅತಿ ಕಡಿಮೆ ತಾಪಮಾನವಾಗಿದೆ. ಬೆಂಗಳೂರು ಎಚ್‌ಎಎಲ್‌ನಲ್ಲಿ 13.4°C, ಬೆಂಗಳೂರು ನಗರದಲ್ಲಿ 14.5°C,, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣದಲ್ಲಿ 12.9°C, ಹಾಸನದಲ್ಲಿ 8.7°C, ಆಗುಂಬೆಯಲ್ಲಿ 9.3°C, ಧಾರವಾಡದಲ್ಲಿ 9.5°C, ವಿಜಯಪುರದಲ್ಲಿ 10°C ದಾಖಲಾಗಿದೆ.

ಬೆಂಗಳೂರಿನಲ್ಲಿ ತಾಪಮಾನ 14°Cಗೆ ಇಳಿದ ಪರಿಣಾಮವಾಗಿ, ಬೆಳಗಿನ ವಾಯುವಿಹಾರಕ್ಕೆ ಹೋಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಲಾಲ್‌ಬಾಗ್‌ನಂತಹ ಉದ್ಯಾನವನಗಳಲ್ಲಿ ಬೆಳಗಿನ ವಾಕಿಂಗ್‌ಗೆ ಬರುವವರ ಸಂಖ್ಯೆ ಶೇ. 50ರಷ್ಟು ಕುಸಿತ ಕಂಡಿದೆ. ಡಿಸೆಂಬರ್ 17 ರಿಂದ ಚಳಿಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ನಿರೀಕ್ಷೆಯಿದೆ.

ವೈದ್ಯಕೀಯ ಸಲಹೆಗಳು

ವೈದ್ಯರು ಆರೋಗ್ಯದ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ, ವಿಶೇಷವಾಗಿ ಮಕ್ಕಳು ಮತ್ತು ಹಿರಿಯರ ಆರೈಕೆಗೆ ಒತ್ತು ನೀಡಲು ತಿಳಿಸಿದ್ದಾರೆ. ಬೆಳಗಿನ ವಾಕ್ ಮತ್ತು ವ್ಯಾಯಾಮವನ್ನು ತಾತ್ಕಾಲಿಕವಾಗಿ ತಪ್ಪಿಸಿ, ಬೆಚ್ಚನೆಯ ಉಡುಪುಗಳನ್ನು ಧರಿಸಿ ಮತ್ತು ಬಿಸಿ ಆಹಾರ ಸೇವಿಸಿ ಎಂದು ಸೂಚಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ, ಮುಂಜಾನೆ 3 ರಿಂದ 8 ಗಂಟೆಯವರೆಗೆ ತೀವ್ರ ಶೀತ ವಾತಾವರಣ ಇರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಶೇ.10ರಿಂದ 15ರಷ್ಟು ಹೆಚ್ಚಾಗುವ ಆತಂಕವಿದೆ ಎಂದು ತಜ್ಞರು ತಿಳಿಸಿದ್ದಾರೆ, ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಬಹುದು. ಬೆಳಗಿನ ವಾಕಿಂಗ್ ಬದಲು ಸಂಜೆ ವಾಕಿಂಗ್ ಉತ್ತಮ ಎಂದು ಜಯದೇವ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ, ಬಜ್ಜಿ, ಬೋಂಡಾ ಮುಂತಾದ ಕರಿದ ಆಹಾರ ಸೇವನೆಯನ್ನು ತಪ್ಪಿಸಿ, ಆರೋಗ್ಯಕರ ಜೀವನಶೈಲಿ ಅನುಸರಿಸಲು ಸೂಚಿಸಲಾಗಿದೆ.

ಒಣ ಹವೆಯ ಮುನ್ಸೂಚನೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story