
Weather Repotr : ಮಲೆನಾಡಿನಲ್ಲಿ ಮಳೆ ಮುನ್ಸೂಚನೆ; ಬಿಸಿಲಿಗೆ ಬೆಂದ ಬೆಂಗಳೂರು, ಕಲ್ಯಾಣ ಕರ್ನಾಟಕ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಬಿಸಿಲಿನ ಬೇಗೆ ಮತ್ತು ಒಣಹವೆಯ ನಡುವೆ ಹವಾಮಾನ ಇಲಾಖೆ ಇಂದಿನ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ.
ರಾಜ್ಯಾದ್ಯಂತ ಬೇಸಿಗೆಯ ಬಿಸಿಲಿಗೆ ಕಂಗೆಟ್ಟಿರುವ ಜನತೆಗೆ ಹವಾಮಾನ ಇಲಾಖೆ ಕೊಂಚ ನಿರಾಳವೆನಿಸುವ ಸುದ್ದಿ ನೀಡಿದೆ. ಹಾಸನ, ಕೊಡಗು ಸೇರಿದಂತೆ ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿತೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಬಿಸಿಲಿನ ಬೇಗೆ ಮತ್ತು ಒಣಹವೆಯ ನಡುವೆ ಹವಾಮಾನ ಇಲಾಖೆ ಇಂದಿನ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ವರುಣ ತಂಪೆರೆಯುವ ಸಾಧ್ಯತೆ ಇದೆ.
ಆದರೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಹಾಗೂ ಕರಾವಳಿ ಭಾಗಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ, ಸಂಪೂರ್ಣ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
40 ಡಿಗ್ರಿ ದಾಟಿದ ತಾಪಮಾನ
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಮತ್ತು ಯಾದಗಿರಿಯಲ್ಲಿ ಬಿಸಿಲಿನ ಝಳ ವಿಪರೀತವಾಗಿದ್ದು, ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಕರಾವಳಿಯ ಮಂಗಳೂರು, ಉಡುಪಿ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಬಿಸಿಲಿನ ತೀವ್ರತೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.
ಆರೋಗ್ಯ ಇಲಾಖೆಯಿಂದ ಹೈಅಲರ್ಟ್
ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಸೂಚನೆಗಳನ್ನು ಹೊರಡಿಸಿದೆ. ಮಧ್ಯಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಲ್ಟ್ರಾವೈಲೆಟ್ (UV) ಕಿರಣಗಳ ತೀವ್ರತೆಯ ಸೂಚ್ಯಂಕ 10ರಷ್ಟಿರಲಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.
ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಹೆಚ್ಚಿರುವ ಕಾರಣ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಕಾಳಜಿ ವಹಿಸಬೇಕು. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಆಗಾಗ್ಗೆ ನೀರು, ತಂಪು ಪಾನೀಯ ಅಥವಾ ಹಣ್ಣಿನ ರಸ ಸೇವಿಸಬೇಕು. ಜೊತೆಗೆ ಸಂಪೂರ್ಣ ಮೈ ಮುಚ್ಚುವಂತಹ ಹತ್ತಿ ಉಡುಪುಗಳನ್ನು ಧರಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

